ಮಂಗಳೂರು : ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣಮಠದಲ್ಲಿ ರಾಮಕೃಷ್ಣ ಮಠ ಮತ್ತು ದೇಲಂಪಾಡಿ ಯೋಗ ಪ್ರತಿಷ್ಠಾನದ ಸಹಯೋಗದೊಂದಿಗೆ ಎರಡು ವಾರಗಳ ಕಾಲ ನಡೆಯುವ ಯೋಗ ಶಿಬಿರವು ಸೆಪ್ಟೆಂಬರ್ 15, 2026 ರ ಮಂಗಳವಾರ ಸಂಜೆ ಉದ್ಘಾಟನೆಗೊಂಡಿತು. ಆಶ್ರಮದ ಅಧ್ಯಕ್ಷರಾದ ಸ್ವಾಮಿ ಶ್ರೀ ಜಿತಕಾಮಾನಂದಜೀ ಮಹಾರಾಜ್ ಅವರು ಶಿಬಿರವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಯೋಗವು ದೈಹಿಕ ಸಾಮರ್ಥ್ಯ ವರ್ಧನೆ, ಒತ್ತಡದಿಂದ ಮುಕ್ತಿ, ವಿಶ್ರಾಂತಿ, ಸ್ನಾಯುಗಳ ಬಲವರ್ಧನೆ ಹಾಗೂ ರಕ್ತ ಪರಿಚಲನೆಯನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ ಎಂದು ಸ್ವಾಮೀಜಿ ತಿಳಿಸಿದರು. ಪರಿಣಿತ ಗುರುಗಳ ಮಾರ್ಗದರ್ಶನದಲ್ಲಿ ಪ್ರತಿದಿನ ಸರಿಯಾದ ರೀತಿಯಲ್ಲಿ ಯೋಗಾಭ್ಯಾಸ ಮಾಡಿ, ಆರೋಗ್ಯಯುತ ಜೀವನ ನಡೆಸಲು ಸಾರ್ವಜನಿಕರಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ದೇಲಂಪಾಡಿ ಯೋಗ ಪ್ರತಿಷ್ಠಾನದ ಅಂತರ್ರಾಷ್ಟ್ರೀಯ ಯೋಗ ಪ್ರಶಸ್ತಿ ವಿಜೇತೆ ಕುಮಾರಿ ಶ್ರೀ ಲಕ್ಷ್ಮಿ ಅವರನ್ನು ಸ್ವಾಮೀಜಿಯವರು ಸನ್ಮಾನಿಸಿದರು. ಈ ಶಿಬಿರದಲ್ಲಿ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಸರಳ ವ್ಯಾಯಾಮ, ಸೂರ್ಯನಮಸ್ಕಾರ, ಆಸನಗಳು, ಪ್ರಾಣಾಯಾಮ ಹಾಗೂ ಮಂತ್ರ ಮುದ್ರೆಗಳನ್ನು ಕಲಿಸಿಕೊಡಲಿದ್ದಾರೆ.
ಕಾರ್ಯಕ್ರಮವನ್ನು ಶ್ರೀಮತಿ ಸುಶೀಲಾ ಕುಮಾರಿ ವಿ. ನಿರ್ವಹಿಸಿದರು ಮತ್ತು ಶ್ರೀ ಚಂದ್ರಹಾಸ ಬಾಳ ಪ್ರಾರ್ಥನೆ ನೆರವೇರಿಸಿದರು. ಶ್ರೀಮತಿಯರಾದ ಕುಸುಮ ಶೆಟ್ಟಿ, ಭಾರತಿ ರಾವ್ ಮತ್ತು ಪ್ರೇಮ ಕಾರ್ಯಕ್ರಮದಲ್ಲಿ ಸಹಕರಿಸಿದರು.
ಆಸಕ್ತರು ನೋಂದಾಯಿಸಿಕೊಳ್ಳಲು ಆಶ್ರಮದ ಕಾರ್ಯಾಲಯವನ್ನು (0824-2414412) ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.