ಮಂಗಳೂರು:ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ- 2025 ಬಂಗ್ರಕೂಳೂರು ಗೋಲ್ಡ್ ಪಿಂಚ್ ಸಿಟಿಯಲ್ಲಿ ಮೇ 10ರಂದು ನಡೆಯಲಿದ್ದು, ಈ ಕಾರ್ಯಕ್ರಮದ ಚಪ್ಪರ ಮುಹೂರ್ತ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಕಾರ್ಯಕ್ರಮದಲ್ಲಿ ಬ್ಯಾಂಕ್ನ ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ರಜತ ಸಂಭ್ರಮ ನಡೆಯಲಿದ್ದು, ಸುಮಾರು 1.50ಲಕ್ಷಕ್ಕೂ ಅಧಿಕ ನವೋದಯ ಸ್ವಸಹಾಯ ಗುಂಪಿನ ಸದಸ್ಯರು ಒಂದೇ ಬಣ್ಣದ ಸಮವಸ್ತ್ರಧಾರಿಗಳಾಗಿ ಭಾಗವಹಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ ಮಾತನಾಡಿ, ರಜತ ಸಂಭ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವೂ ಅಗತ್ಯ ಎಂದರು.
ನಿರ್ದೇಶಕರಾದ ಶಶಿಕುಮಾರ್ ರೈ ಮಾತನಾಡಿ, ಕಾರ್ಯಕ್ರಮಕ್ಕಾಗಿ ಮೂರು ಪ್ರಮುಖ ವೇದಿಕೆಗಳು ನಿರ್ಮಾಣವಾಗಲಿದ್ದು, ಲಕ್ಷಾಂತರ ಮಂದಿ ಕುಳಿತುಕೊಳ್ಳುವ ಸಭಾ ಚಪ್ಪರ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ಆಹ್ವಾನಿಸುವ ಬಗ್ಗೆಯೂ ಅಧ್ಯಕ್ಷರು ಪ್ರಯತ್ನ ಮಾಡುತ್ತಿದ್ದಾರೆ. ಸಹಕಾರ ಸಂಘದ ಧುರೀಣರು, ನಿರ್ದೇಶಕರು, ಸಮಾಜ ಸೇವೆಯಲ್ಲಿ ತೊಡಗಿಸಿದ್ದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜೈರಾಜ್ ಬಿ. ರೈ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಕಾರಿ ಕೆ.ಗೋಪಾಲಕೃಷ್ಣ ಭಟ್, ಗೋಲ್ಡ್ ಫಿಂಚ್ ಸಂಸ್ಥೆಯ ವ್ಯವಸ್ಥಾಪಕ ಬಾಲಕೃಷ್ಣ ಶೆಟ್ಟಿ, ಉದ್ಯಮಿ ಜಯಪ್ರಕಾಶ್ ತುಂಬೆ, ದಿವಾಕರ್, ನವೋದಯ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟಿನ ಮುಖ್ಯಕಾರ್ಯನಿರ್ವಹಣಾಕಾರಿ ಪೂರ್ಣಿಮಾ ಶೆಟ್ಟಿ, ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಲೋಕೇಶ್ ಮೊದಲಾದವರು ಉಪಸ್ಥಿತರಿದ್ದರು.