ಮಂಗಳೂರು, : ಕರಾವಳಿಯ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಸಂಘಟನೆಯಾದ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೆ ವರ್ಷದ ವಾರ್ಷಿಕೋತ್ಸವ ಜು. 7ರಂದು ನಡೆಯಲಿದ್ದು, ಸಮಾರಂಭದಲ್ಲಿ ಹಿರಿಯ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಅವರಿಗೆ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಮೈಮ್ ರಾಮದಾಸ್ ಹೇಳಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿ, ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಎಲ್ಸಿಆರ್ಐ ಸಭಾಂಗಣದಲ್ಲಿ ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದೆ. 2008ರಲ್ಲಿ ಪ್ರಾರಂಭವಾದ ರಂಗ ಸಂಗಾತಿ ಸಂಸ್ಥೆಯು ಬಹುಮುಖ ಪ್ರತಿಭೆ, ರಂಗಸಂಗಾತಿಯ ಸ್ಥಾಪಕ ಸದಸ್ಯ ದಿ. ಭಾಸ್ಕರ ನೆಲ್ಲಿತೀರ್ಥ ಅವರ ನೆನಪಿನಲ್ಲಿ "ರಂಗ ಭಾಸ್ಕರ" ಪ್ರಶಸ್ತಿಯನ್ನು ನೀಡುತ್ತಿದೆ. ಈಗಾಗಲೇ 10 ಮಂದಿ ಸಾಧಕರಿಗೆ ರಂಗ ಭಾಸ್ಕರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಲಕ್ಷ್ಮಣ ಕುಮಾರ್ 1962ರಲ್ಲಿ ಬಾಲ ನಟನಾಗಿ ರಂಗ ಪ್ರವೇಶ ಮಾಡಿ 65 ವರ್ಷಗಳಿಂದ ರಂಗ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಿರ್ದೇಶಕನಾಗಿಯೂ ರಂಗಭೂಮಿ ಮತ್ತು ಚಲನಚಿತ್ರಗಳಲ್ಲಿ ಸಕ್ರಿಯರಾಗಿದ್ದಾರೆ. 30ಕ್ಕೂ ಹೆಚ್ಚು ಕನ್ನಡ, ತುಳು ಸಿನೆಮಾಗಳಲ್ಲಿ ಅಭಿನಯದ ಜತೆಗೆ ಧಾರವಾಹಿ, ಕಿರುಚಿತ್ರ, ಜಾಹೀರಾತುಗಳಲ್ಲಿಯೂ ತಮ್ಮ ಅಭಿನಯ ಸಾಮರ್ಥ್ಯ ಪ್ರದರ್ಶಿಸಿದ್ದಾರೆ ಎಂದವರು ಹೇಳಿದರು.
ಶಶಿರಾಜ್ ಕಾವೂರು ಮಾತನಾಡಿ ಹರಿಕೃಷ್ಣ ಪುನರೂರು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಹೆಗ್ಗೋಡಿನ ಜನಮನದಾಟ ತಂಡದಿಂದ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಮಾಯಾ ಮೃಗ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಕಾಕ್ರವವರ ಎದೆಯ ಹಣತೆ ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರುಣಾಕರ ಶೆಟ್ಟಿ, ನಾಗೇಶ್ ಶೆಟ್ಟಿ ಬಜಾಲ್, ಪ್ರಸಾದ್ ಶೆಟ್ಟಿ, ರಂಜನ್ ಬೋಳೂರು ಮೊದಲಾದವರು ಉಪಸ್ಥಿತರಿದ್ದರು.