ಮಂಗಳೂರು : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸಿಕೊಂಡು ಬರುತ್ತಿರುವ ಬೃಹತ್ ಉದ್ಯೋಗಮೇಳ 'ಆಳ್ವಾಸ್ ಪ್ರಗತಿ'. 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ ಉದ್ಯೋಗಮೇಳವು ವೃತ್ತಿ ಆಕಾಂಕ್ಷಿಗಳಿಗೆ ಸದಾ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದ್ದು ಈ ಮೇಳವು ವಿಶೇಷವಾಗಿ ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಉದ್ಯೋಗ ಅವಕಾಶಕೊಡಿಸುವ ಮಹತ್ಕಾರವನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿದೆ. ಇಲ್ಲಿವರೆಗೆ ಆಳ್ವಾಸ್ ಉದ್ಯೋಗ ಮೇಳಗಳ ಮೂಲಕ ಒಟ್ಟು 36,151 ಉದ್ಯೋಗಗಳನ್ನು ನೀಡಲಾಗಿದೆ ಹಾಗೂ 61,517 ಅಭ್ಯರ್ಥಿಗಳನ್ನು ವಿವಿಧ ಕಂಪೆನಿಗಳು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ ಎಂದು ಆಳ್ವಾಸ್ ನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವರವರು ತಿಳಿಸಿದ್ದಾರೆ. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಆಳ್ವಾಸ್ ಪ್ರಗತಿ 2025ರ 15ನೇ ಆವೃತ್ತಿಯ ಉದ್ಘಾಟನೆಯು ಆಗಸ್ಟ್ 01 ವಿದ್ಯಾಗಿರಿಯಲ್ಲಿ ಬೆಳಿಗ್ಗೆ 9.30 ಕ್ಕೆ ನಡೆಯಲಿದ್ದು, ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರು ಹಾಗೂ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡು ರಾವ್ ನೆರವೇರಿಸಲಿದ್ದಾರೆ. ಮಂಗಳೂರು ವಿವಿಯ ಕುಲಪತಿಗಳಾದ ಡಾ ಪಿಎಲ್ ಧರ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಮೂಲ್ಕಿ-ಮೂಡುಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಜನಪ್ರತಿನಿಧಿಗಳ ಗೌರವ ಉಪಸ್ಥಿತಿರಿರುವರೆಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅಲ್ಕಾರ್ಗೋ ಲಾಜಿಸ್ಟಿಕ್ಸ್ನ ಅಧ್ಯಕ್ಷರಾದ ಶಶಿಕಿರಣ್ ಶೆಟ್ಟಿ, ದುಬೈನ ಫಾರ್ಚುನ್ ಗ್ರೂಪ್ ಆಫ್ ಹೊಟೇಲ್ಸ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ, ಸೌದಿ ಅರೇಬಿಯದ ಎಕ್ಸಪರ್ಟಟೈಸ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆಎಸ್ ಶೇಖ್ ಕರ್ನಿರೆ, ಬಿಗ್ ಬ್ಯಾಗ್ಸ್ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ನ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಶ್ ಕಾಮತ್, ರೋಹನ್ ಕಾರ್ಪೋರೇಶನ್ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಹನ್ ಮೊಂತೆರೊ,ನೀವಿಯಸ್ ಸೊಲ್ಯೂಷನ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಯೋಗ್ ಶೆಟ್ಟಿ ಯವರಿಗೆ ಸನ್ಮಾನ ಸಮಾರಂಭ ನಡೆಯಲಿದೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಈ ಬಾರಿ 15ನೇ ಆವೃತ್ತಿಯದ್ದಾಗಿದ್ದು, ಆಗಸ್ಟ್ 1 ಹಾಗೂ 2 ರಂದು ಇಲ್ಲಿನ ವಿದ್ಯಾಗಿರಿಯ ಆವರಣದಲ್ಲಿ ನಡೆಯಲಿದೆ. ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಇಎಸ್, ಹೆಲ್ತ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟ್ಯಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ.ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್ಎಸ್ಎಲ್ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಯಾವುದೇ ಕೋರ್ಸಗಳನ್ನು 2025ರ ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವವರು ಹಾಗೂ ಅನುಭವವಿರುವ ಅಭ್ಯರ್ಥಿಗಳು ಈ ಮೇಳದಲ್ಲಿ ಮುಕ್ತವಾಗಿ ಭಾಗವಹಿಸಬಹುದು.
ಉದ್ಯೋಗಮೇಳದಲ್ಲಿ ಪಾಲ್ಗೊಳ್ಳುವ ಕಂಪೆನಿಗಳ ವಿವರಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್ಸೈಟ್ www.alvaspragati.com ಪ್ರಕಟಿಸಲಾಗಿದೆ. ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ http://alvaspragati.com/Candidate Registration ವೆಬೈಟ್ನಲ್ಲಿ ಉಚಿತವಾಗಿ ನೋಂದಾವಣೆ ಮಾಡಬಹುದಾಗಿದೆ.
ಈ ಬಾರಿಯ ಆಳ್ವಾಸ್ ಪ್ರಗತಿಯಲ್ಲಿ ಈಗಾಗಲೇ 285 ಕಂಪೆನಿಗಳ ನೋಂದಾವಣೆಯನ್ನು ಖಾತ್ರಿಪಡಿಸಲಾಗಿದೆ. ಮಾರಾಟ ಮತ್ತು ಚಿಲ್ಲರೆ ವಲಯ,ಹೆಲ್ತ್ ಕೇರ್ ವಲಯ, ಫಾರ್ಮಾ ವಲಯ ಐಟಿ ವಲಯ, ಐಟಿಇಎಸ್ ವಲಯ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯ, ಮ್ಯಾನುಫ್ಯಾಕ್ಟರಿಂಗ್ ವಲಯ ಹಾಗೂ ಇನ್ನಿತರ ವಲಯಗಳಿಂದ ಕಂಪನಿಗಳು ಬರಲಿವೆ. ಇದರಲ್ಲಿ 15930+ ಉದ್ಯೋಗ ಅವಕಾಶಗಳು ಇರಲಿವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ತರಬೇತಿ ಮತ್ತು ನಿಯೋಜನೆ ಯ ಮುಖ್ಯಸ್ಥರು ರಂಜಿತಾ ಆಚಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹಾಗೂ ಅಮಿತ್ ಶೆಟ್ಟಿ ಉಪಸ್ಥಿತರಿದ್ದರು.