ಮಂಗಳೂರು : ಬಸವಣ್ಣನವರ ತತ್ವಗಳನ್ನು ಆಧರಿಸಿದ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ 'ಬಸವ ಪರಿಷತ್ ' ಬಸವ ಪುರಸ್ಕಾರದಂತಹ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡುವುದರ ಮೂಲಕ ಸಾಧಕರನ್ನು ಗುರುತಿಸುತ್ತಿದ್ದು, ಈ ಬಾರಿಯ ಬಸವ ಪುರಸ್ಕಾರ್ -2025 ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಆಯ್ಕೆಗೊಂಡಿದ್ದಾರೆ.
ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರ ಹಾಗೂ ಮಹಿಳಾ ಸಬಲೀಕರಣದಲ್ಲಿ ಗೈದಿರುವ ಅತ್ಯದ್ಬುತ ಸಾಧನೆಯನ್ನು ಗುರುತಿಸಿ ಬಸವ ಪುರಸ್ಕಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪರಮ ಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು , ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಸುತ್ತೂರು ಕ್ಷೇತ್ರ ಮೈಸೂರು ಇವರ ದಿವ್ಯ ಸಾನ್ನಿದ್ಯದಲ್ಲಿ ಆಗಸ್ಟ್ -9 ರಂದು ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಹಕಾರ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಕಾಲ ತನ್ನನ್ನು ತೊಡಗಿಸಿಕೊಂಡಿರುವ ರಾಜೇಂದ್ರ ಕುಮಾರ್ ಅವರು ರಾಜ್ಯದಲ್ಲಿ ಒಬ್ಬ ಸಮರ್ಥ ಸಹಕಾರಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿರುವ ಇವರು ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಈ ಬ್ಯಾಂಕ್ ನ್ನು ಒಂದು ಮಾದರಿ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆ ಇವರದ್ದು. 110 ವರ್ಷಗಳ ಇತಿಹಾಸವನ್ನು ಹೊಂದಿರುವ ಎಸ್ ಸಿಡಿಸಿಸಿ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ತನ್ನ ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ನಗರ ಹಾಗೂ ಗ್ರಾಮೀಣ ಭಾಗದ 113 ಶಾಖೆಗಳ ಮೂಲಕ ನೀಡುತ್ತಿದೆ.ಸುಸಜ್ಜಿತ ವಾಹನದ ಮೂಲಕ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಬ್ಯಾಂಕ್ ನೀಡುತ್ತಿದೆ. ಇವೆಲ್ಲವೂ ಡಾ ಎಂ.ಎನ್.ರಾಜೇಂದ್ರ ಕುಮಾರ್ ಅವರ ದಕ್ಷ ನಾಯಕತ್ವದಿಂದ ಸಾಧ್ಯವಾಗಿದೆ.
ಸಮಾಜ ಸೇವೆಯಲ್ಲೂ ರಾಜೇಂದ್ರ ಕುಮಾರ್ ಅವರ ಕೊಡುಗೆ ಅನನ್ಯವಾಗಿದೆ. ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ಇವರು ಮುಖ್ಯವಾಗಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದ್ದಾರೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಅವರು ಮಹಿಳೆಯರಲ್ಲಿ ಆರ್ಥಿಕ ಚೈತನ್ಯವನ್ನು ತುಂಬಿದ್ದಾರೆ. ಸಹಕಾರ , ಸಾಮಾಜಿಕ, ಬ್ಯಾಂಕಿಂಗ್ ಹಾಗೂ ಮಹಿಳಾ ಸಬಲೀಕರಣದಲ್ಲಿ ಸಾರ್ಥಕ , ಪ್ರಾಮಾಣಿಕ ಸೇವೆಯನ್ನು ಗೈದಿರುವ ಇವರು ಮಾದರಿ ಸಹಕಾರಿ ನಾಯಕರಾಗಿದ್ದು ಹಲವಾರು ರಾಜ್ಯ , ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳಿಂದಲೂ ಪುರಸ್ಕೃತರಾಗಿದ್ದಾರೆ.