ಮಂಗಳೂರು: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 20 ಅರ್ಹ ಮಹಿಳಾ ಫಲಾನುಭವಿಗಳಿಗೆ 2024-25ನೇ ಸಾಲಿನ ‘ಹೊಲಿಗೆ ಯಂತ್ರ ವಿತರಣೆ ಯೋಜನೆ’ಯಡಿ ಇಂದು ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರದ ಕಲ್ಯಾಣ ಯೋಜನೆಗಳು ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪಬೇಕು ಎಂಬುದು ನಮ್ಮ ಆಶಯವಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಂಡು, ಸ್ವಾವಲಂಬಿಗಳಾಗಿ ಗೌರವಯುತ ಜೀವನ ನಡೆಸಲು ಇದು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯಾ, ಸಹಾಯಕ ಲೆಕ್ಕಾಧಿಕಾರಿ ಪರಮೇಶ್ವರ, ಸಹಾಯಕ ಅಭಿವೃದ್ಧಿ ಅಧಿಕಾರಿ ಜಯಶ್ರೀ ಹಾಗೂ ನಿಗಮದ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಆಯ್ಕೆಯಾದ ಫಲಾನುಭವಿಗಳು ಈ ಯೋಜನೆಯ ಮೂಲಕ ತಮ್ಮ ಸ್ವಂತ ಉದ್ಯೋಗ ಆರಂಭಿಸುವ ಆಶಯ ವ್ಯಕ್ತಪಡಿಸಿದರು.