ಮಂಗಳೂರು: ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ಬೆಸೆಂಟ್ ಮಹಿಳಾ ಕಾಲೇಜಿನ ಸಹಯೋಗದೊಂದಿಗೆ ವೀರರಾಣಿ ಅಬ್ಬಕ್ಕನ ಕುರಿತಾದ ಸರಣಿ ಉಪನ್ಯಾಸ ಕಾರ್ಯಕ್ರಮವನ್ನು ಏಪ್ರಿಲ್ 24ರಂದು ಮಧ್ಯಾಹ್ನ 2.00 ಗಂಟೆಗೆ ಮಂಗಳೂರಿನ ಕೊಡಿಯಾಲ್ಬೈಲ್ನಲ್ಲಿರುವ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದೆ ಎಂದು ಕೆ ಜಯರಾಮ ಶೆಟ್ಟಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ,
ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಸ್ವಾಗತಾಧ್ಯಕ್ಷರಾದ ಕೆ. ಜಯರಾಮ ಶೆಟ್ಟಿ ಪ್ರಸ್ತಾವನೆ ಮಾಡಲಿದ್ದು, ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷರಾದ ದಿನಕರ್ ಉಳ್ಳಾಲ್ ಅವರು ಅಬ್ಬಕ್ಕನ ವೀರತ್ವದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವುಮೆನ್ಸ್ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್, ಉಪಾಧ್ಯಕ್ಷೆ ಡಾ. ಮಂಜುಳಾ ಕೆ.ಟಿ., ಬೆಸೆಂಟ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಕುಮಾರ್ ಕೆ.ಸಿ. ಹಾಗೂ ನಿವೃತ್ತ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ರಾಮಚಂದ್ರ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದಿನಕರ್ ಉಲ್ಲಾಳ್, ಸದಾನಂದ ಬಂಗೇರ, ಆನಂದ ಅಸೈಗೋಳಿ, ಯುಪಿ ಅಲಿಯಬ್ಬ ಮತ್ತು ರತ್ನಾವತಿ ಬೈಕಾಡಿ ಉಪಸ್ಥಿತರಿದ್ದರು.