ಮಂಗಳೂರು : ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಲು ಜಿಲ್ಲಾಧಿಕಾರಿಯವರ ಹಳೇ ಕಟ್ಟಡವನ್ನು ಗುರುತಿಸಲಾಗಿದ್ದು, ಈ ಕಟ್ಟಡದ ದುರಸ್ತಿ ಕಾರ್ಯಕ್ಕೆ ಜಿಲ್ಲಾಧಿಕಾರಿಯವರು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಿದ್ದಾರೆ. ಈ ಸಂಬಂಧ ಹೈಕೋರ್ಟ್ ಸಂಚಾರಿ ಪೀಠದ ಸಂಚಾಲಕರು ಹಾಗೂ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿʼಸೋಜಾರವರು ಇಂದು ಮಾನ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಅಧಿಕೃತವಾಗಿ ಮನವಿಯನ್ನು ಸಲ್ಲಿಸಿದರು. ಶಾಸಕರ ಈ ಮನವಿಗೆ ತಕ್ಷಣವೇ ಸ್ಪಂದಿಸಿದ ಮಾನ್ಯ ಸಚಿವರು, ಮಂಗಳೂರಿನ ಹೈಕೋರ್ಟ್ ಸಂಚಾರಿ ಪೀಠದ ಕಟ್ಟಡಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆಯಿಂದ ಒದಗಿಸಿಕೊಡುವುದಾಗಿ ಈ ಸಂದರ್ಭದಲ್ಲಿ ದೃಢವಾದ ಭರವಸೆ ನೀಡಿದ್ದಾರೆ.