ಉಜಿರೆ : ಗ್ರಾಮೀಣ ಸಮುದಾಯಗಳಿಗೆ ಆರ್ಥಿಕ ಸಾಕ್ಷರತೆ ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳು (FLC-CRP) ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಎನ್ಆರ್ಎಲ್ಎಂ (NRLM) ವಿಭಾಗದ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ ಹರಿಪ್ರಸಾದ್ ಅವರು ಹೇಳಿದರು. ಅವರು ಸಿದ್ಧವನದ ರುಡ್ಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಹಣಕಾಸು ಸಾಕ್ಷರತಾ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ತರಬೇತಿ ಕಿಟ್ಗಳನ್ನು ವಿತರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಸುನೀಲ್ ನಾಯಕ್ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಎನ್ಆರ್ಎಲ್ಎಂ ವಿಭಾಗದ ಜಿಲ್ಲಾ ವ್ಯವಸ್ಥಾಪಕರಾದ ಶ್ರೀಮತಿ ಶಕುಂತಲಾ ಅವರು ತರಬೇತಿದಾರರೊಂದಿಗೆ ಸಂವಾದ ನಡೆಸಿದರು. ಕೆಲವು ಶಿಬಿರಾರ್ಥಿಗಳು ತಮ್ಮ ಕಲಿಕೆಯ ಅನುಭವಗಳನ್ನು ಹಂಚಿಕೊಂಡು, ಗುಣಮಟ್ಟದ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ರುಡ್ಸೆಟ್ ಸಂಸ್ಥೆ ಹಾಗೂ ಎನ್ಆರ್ಎಲ್ಎಂ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಕರುಣಾಕರ್ ಕೆ. ಜೈನ್ ಅವರು ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ತಾಲೂಕು ಪಂಚಾಯತ್ನ ಎನ್ಆರ್ಎಲ್ಎಂ ತಾಲೂಕು ಯೋಜನಾ ವ್ಯವಸ್ಥಾಪಕರಾದ ಶ್ರೀಮತಿ ಶ್ವೇತಾ ಧನ್ಯವಾದ ಸಮರ್ಪಿಸಿದರು.