ಧರ್ಮಸ್ಥಳ : ಮಂಜುನಾಥ ಸ್ವಾಮಿ ದರ್ಶನ ಪಡೆದ ಮಾಜಿ ಸಿಎಂ ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ಮಾಜಿ ಸಚಿವ ಅಭಯಚಂದ್ರ ಜೈನ್ ಅವರೊಂದಿಗೆ ಪ್ರಸಿದ್ಧ ಪುಣ್ಯಕ್ಷೇತ್ರವಾದ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಶ್ರೀಕ್ಷೇತ್ರಕ್ಕೆ ಆಗಮಿಸಿದ ನಾಯಕರು, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ದೇವರಿಗೆ ವಿಶೇಷ ಪೂಜೆ ಹಾಗೂ ಹರಕೆಯನ್ನು ಸಲ್ಲಿಸಿದರು. ಕ್ಷೇತ್ರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದ ವೀರಪ್ಪ ಮೊಯ್ಲಿ ಮತ್ತು ಅಭಯಚಂದ್ರ ಜೈನ್ ಅವರು, ಹೆಗ್ಗಡೆಯವರ ಆಶೀರ್ವಾದ ಪಡೆದು ಕೆಲಕಾಲ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ಈ ಧಾರ್ಮಿಕ ಭೇಟಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ನಾಯಕರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.