ಮಂಗಳೂರು: ಸಹಕಾರ ರಂಗದ ಪಿತಾಮಹ, ದಿವಂಗತ ಮೊಳಹಳ್ಳಿ ಶಿವರಾಯರ ಸ್ಮರಣಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್ಸಿಡಿಸಿಸಿ) ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಶನಿವಾರ ವಿಶೇಷ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು, ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ದೇಶದ ಭವಿಷ್ಯಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಬ್ಯಾಂಕ್ ಸದಾ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ನವೋದಯ ಗ್ರಾಮ ವಿಕಾಸ ಯೋಜನೆಯು ಶೇಕಡಾ 90 ರಷ್ಟು ಮಹಿಳಾ ಸದಸ್ಯರಿಗೆ ಸ್ವಾವಲಂಬಿ ಜೀವನವನ್ನು ಒದಗಿಸಿದೆ. ಯುವ ಸಾಧಕರು ಭವಿಷ್ಯದಲ್ಲಿ ಕನಿಷ್ಠ ಇಬ್ಬರು ಮಕ್ಕಳಿಗೆ ಸಹಾಯ ಮಾಡಿದರೆ ಬ್ಯಾಂಕಿನ ಶ್ರಮ ಸಾರ್ಥಕವಾಗುತ್ತದೆ ಎಂದು ಅವರು ಆಶಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಿಸಿದ ಮಾಜಿ ಸಚಿವ ಜೆ. ಕೃಷ್ಣ ಪಾಲೇಮಾರ್ ಮಾತನಾಡಿ, ಇಂತಹ ಗೌರವಗಳು ಇತರ ಮಕ್ಕಳಿಗೂ ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ. ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಜನಪರ ಕಾರ್ಯಗಳು ಹಾಗೂ ಸಹಕಾರ ರಂಗದ ಕೊಡುಗೆಗಳು ರಾಜ್ಯಕ್ಕೆ ಮಾದರಿಯಾಗಿದ್ದು, ಮೊಳಹಳ್ಳಿ ಶಿವರಾಯರ ಪರಂಪರೆಯನ್ನು ನೆನಪಿಸುತ್ತವೆ ಎಂದು ಶ್ಲಾಘಿಸಿದರು. ವರ್ಷದ ಹತ್ತನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 34 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಶ್ರೇಷ್ಠತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರೊಂದಿಗೆ ಬ್ಯಾಂಕ್ ಸಿಬ್ಬಂದಿಯ 116 ಮಕ್ಕಳಿಗೆ ಹಾಗೂ ನವೋದಯ ಸ್ವಸಹಾಯ ಗುಂಪಿನ ಸದಸ್ಯರ 161 ಮಕ್ಕಳಿಗೆ ಉನ್ನತ ಶಿಕ್ಷಣದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಇದೇ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜನತಾ ಬಜಾರ್ ಶಾಖಾ ವ್ಯವಸ್ಥಾಪಕ ದೀಪಕ್ ಅವರ ಪುತ್ರ ಕನಿಶ್ ಡಿ. ಕೋಟ್ಯಾನ್, ವಿವಿಧ ಕ್ಷೇತ್ರಗಳಲ್ಲಿ ಪ್ರತಿಭೆ ತೋರಿದ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಿಬ್ಬಂದಿ ಚಂದ್ರಶೇಖರ್ ಅವರ ಪುತ್ರಿ ಶ್ರೀಜಾ ಸಿ. ಕೋಟ್ಯಾನ್ ಮತ್ತು ಯೋಗ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ತನುಶ್ರೀ ಪಿತ್ರೋಡಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ತನುಶ್ರೀ ಅವರು ಈ ಸಂದರ್ಭದಲ್ಲಿ ಯೋಗ ಪ್ರದರ್ಶನ ನೀಡಿದರು. ಚಿತ್ರಲೇಖಾ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ನೊಟ್ಟು ಸ್ವಾಗತಿಸಿದರು. ಬ್ಯಾಂಕ್ ಸಿಬ್ಬಂದಿ ರಾಜೀವ್ ಕಾಕ್ಯಪದವು ಕಾರ್ಯಕ್ರಮ ನಿರೂಪಿಸಿದರೆ, ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜೇಶ್ ಶೆಟ್ಟಿ ವಂದಿಸಿದರು.
ವೇದಿಕೆಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಕೆ., ನಿರ್ದೇಶಕರುಗಳಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಎಸ್. ಬಿ. ಜಯರಾಮ ರೈ, ಮೊನಪ್ಪ ಶೆಟ್ಟಿ ಎಕ್ಕಾರು, ಎಂ. ಮಹೇಶ್ ಹೆಗ್ಡೆ, ರಾಜೇಶ್ ರಾವ್, ಎಸ್. ಎನ್. ಮನ್ಮಥ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಎಂಡಿ ಪ್ರವೀಣ್ ನಾಯಕ್, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಹೆಚ್. ಎನ್., ಸಹಾಯಕ ನಿಬಂಧಕ ರಘು ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಸುನಿಲ್ ಕುಮಾರ್ ಹೊಳ್ಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.