ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯಾವುದೇ ತುರ್ತು ಪರಿಸ್ಥಿತಿಯನ್ನು ನಿರ್ವಹಿಸಲು ಎಲ್ಲಾ ಅಧಿಕಾರಿಗಳು ದಿನದ 24 ಗಂಟೆಯೂ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚನೆ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಆನ್ಲೈನ್ ಸಭೆ ನಡೆಸಿ ಮಾತನಾಡಿದ ಅವರು, ಎಲ್ಲಾ ತಾಲೂಕು ಆಡಳಿತಗಳು ಹಾಗೂ ಕಂಟ್ರೋಲ್ ರೂಂಗಳು 24/7 ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲೆಯಲ್ಲಿ ಮಣ್ಣು ಜರಿತ ಮತ್ತು ಗುಡ್ಡ ಕುಸಿತದ ಅಪಾಯವಿರುವ ಸಂಭಾವ್ಯ ಸ್ಥಳಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಪಾಯದಲ್ಲಿರುವ ನಿವಾಸಿಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಹಾಗೂ ಮುಂಜಾಗ್ರತಾ ಕ್ರಮವಾಗಿ ಮರಳು ಚೀಲಗಳನ್ನು ಇಟ್ಟು ತಾತ್ಕಾಲಿಕ ತಡೆ ನಿರ್ಮಿಸಬೇಕು ಎಂದು ತಿಳಿಸಿದರು.
ಪ್ರಾಕೃತಿಕ ವಿಕೋಪದಿಂದ ಸಂಭವಿಸುವ ಜೀವಹಾನಿಗೆ 24 ಗಂಟೆಯೊಳಗೆ ಪರಿಹಾರ ಚೆಕ್ ವಿತರಿಸಬೇಕು. ಸ್ಥಳಾಂತರಗೊಂಡ ಸಂತ್ರಸ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಅಗ್ನಿಶಾಮಕ ಪಡೆ, ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ನಿರಂತರವಾಗಿ ಅಲರ್ಟ್ನಲ್ಲಿರಬೇಕು ಎಂದು ನಿರ್ದೇಶಿಸಿದರು. ಚಾರ್ಮಾಡಿ, ಸಂಪಾಜೆ, ಶಿರಾಡಿ ಘಾಟ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಭೂಕುಸಿತ ಉಂಟಾದಲ್ಲಿ ತಕ್ಷಣ ತೆರವುಗೊಳಿಸಲು ಅಗತ್ಯ ಯಂತ್ರೋಪಕರಣಗಳೊಂದಿಗೆ ಸಿದ್ಧರಿರಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ನರ್ವಡೆ ವಿನಾಯಕ್ ಕಾರ್ಭಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ. ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.