ಮಂಗಳೂರು : ಮೊಳಹಳ್ಳಿ ಶಿವರಾಯರು ಸಹಕಾರಿ ರಂಗದ ಬೆಳವಣಿಗೆಗೆ ಭದ್ರ ತಳಪಾಯ ಹಾಕಿಕೊಟ್ಟಿದ್ದರಿಂದಲೇ ಜಿಲ್ಲೆಯ ಸಹಕಾರ ಕ್ಷೇತ್ರವು ಉನ್ನತ ಮಟ್ಟಕ್ಕೆ ಏರಲು ಸಾಧ್ಯವಾಯಿತು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಎಸ್ಸಿಡಿಸಿಸಿ ಬ್ಯಾಂಕ್ನ ಸಭಾಂಗಣದಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರು ರಚಿಸಿದ 'ತ್ಯಾಗಮಯಿ ಮೊಳಹಳ್ಳಿ' ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮೊಳಹಳ್ಳಿಯಲ್ಲಿ ಜನಿಸಿದ ಶಿವರಾಯರು ತಮ್ಮ ಕಾರ್ಯಕ್ಷೇತ್ರವಾಗಿ ಪುತ್ತೂರು ಮತ್ತು ಮಂಗಳೂರನ್ನು ಆಯ್ಕೆ ಮಾಡಿಕೊಂಡಿದ್ದರು. ವಕೀಲ ವೃತ್ತಿಯಲ್ಲಿದ್ದ ಅವರು ಸುಮಾರು 60 ವರ್ಷಗಳ ಕಾಲ ಸಹಕಾರಿ ರಂಗದ ಬೆಳವಣಿಗೆಗಾಗಿ ಶ್ರಮಿಸಿದ್ದಾರೆ. ಅವರ ಪರಿಶ್ರಮದ ಫಲವಾಗಿಯೇ ಇಂದು ಸಹಕಾರಿ ಕ್ಷೇತ್ರವು ವಿಸ್ತಾರವಾಗಿ ಬೆಳೆದು ನಿಂತಿದೆ. ಈ ಸಂದರ್ಭದಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅವರು ಇಂತಹ ಮಹತ್ವದ ಕೃತಿಯನ್ನು ರಚಿಸಿರುವುದು ಅಭಿನಂದನೀಯ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಲೇಖಕ ಎಸ್. ಜಗದೀಶ್ಚಂದ್ರ ಅಂಚನ್ ಎಲ್ಲರನ್ನೂ ಸ್ವಾಗತಿಸಿದರು, ಸುಬ್ರಹ್ಮಣ್ಯ ಪಡುಕೋಣೆ ಧನ್ಯವಾದ ಸಮರ್ಪಿಸಿದರು. ವೇದಿಕೆಯಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಅಶೋಕ್ ಕುಮಾರ್, ನಬಾರ್ಡ್ ಡಿಜಿಎಂ ಸಂಗೀತಾ ಕರ್ತ, ಎಸ್ಸಿಡಿಸಿಸಿ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸಹಕಾರಿ ಇಲಾಖೆಯ ಉಪನಿಬಂಧಕ ರಮೇಶ್, ಸಹಾಯಕ ನಿಬಂಧಕ ಸುಧೀರ್ ಕುಮಾರ್ ಹಾಗೂ ಲೇಖಕ ಜಗದೀಶ್ಚಂದ್ರ ಅಂಚನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.