ಮಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ 2026ರ ಆಗಸ್ಟ್ ತಿಂಗಳ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳಿಗೆ ಶೇಕಡಾ 50 ರಷ್ಟು ವಿಶೇಷ ರಿಯಾಯಿತಿ ಘೋಷಿಸಲಾಗಿದೆ. ಈ ರಿಯಾಯಿತಿ ಸೌಲಭ್ಯವು ಬೆಂಗಳೂರಿನ ಕನ್ನಡ ಭವನದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆ (ಸಂಪರ್ಕ: 080-22107705), ರಾಜ್ಯದ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು ಹಾಗೂ ಪ್ರಾಧಿಕಾರದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿರಲಿದೆ. ಇದಲ್ಲದೆ, ಪುಸ್ತಕ ಪ್ರೇಮಿಗಳು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ (https://kpp.karnataka.gov.in) ಮೂಲಕ ಆನ್ಲೈನ್ನಲ್ಲೂ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದು.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವ್ಯಕ್ತಿಚಿತ್ರ, ನಾಟಕ, ಜಾನಪದ, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಪರಿಸರ ಹಾಗೂ ಕೃಷಿ ಸೇರಿದಂತೆ ವಿವಿಧ ಪ್ರಕಾರಗಳ 700ಕ್ಕೂ ಹೆಚ್ಚು ಶೀರ್ಷಿಕೆಗಳನ್ನು ಪ್ರಾಧಿಕಾರವು ಪ್ರಕಟಿಸಿದೆ. ಪ್ರಾಜ್ಞರು ರಚಿಸಿದ ಈ ಮೌಲಿಕ ಕೃತಿಗಳನ್ನು ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಈ ಅವಕಾಶ ಕಲ್ಪಿಸಲಾಗಿದ್ದು, ಸಾಹಿತ್ಯಾಸಕ್ತರು ಹಾಗೂ ಓದುಗರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ.