ಮಂಗಳೂರು: ಮೂಡುಬಿದಿರೆಯ ಆಳ್ವಾಸ್ನ ವಿದ್ಯಾಗಿರಿ ಆವರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಇದೇ ಆಗಸ್ಟ್ 7 ಮತ್ತು 8 ರಂದು ಆಯೋಜಿಸಲಾಗಿರುವ 16ನೇ ಆವೃತ್ತಿಯ 'ಆಳ್ವಾಸ್ ಪ್ರಗತಿ' ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ, ನಗರದ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ ಹಾಗೂ ಸಂದರ್ಶನ ತರಬೇತಿ ಕಾರ್ಯಾಗಾರವು ಜರುಗಿತು.
ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆನರಾ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿರುವ ಈ ಮಾಹಿತಿ ಶಿಬಿರವು ಎಲ್ಲರಿಗೂ ಉಪಯೋಗವಾಗಲಿ ಎಂದು ಆಶಿಸಿದರು. ಹೆತ್ತವರು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಆಸೆಕಂಗಳಿಂದ ಕಾಯುತ್ತಿದ್ದು ಅವರನ್ನು ನಿರಾಸೆಗೊಳಿಸಬಾರದು ಎಂದ ಅವರು, ಆಳ್ವಾಸ್ ಪ್ರಗತಿ ಇಂದು ದೇಶದ ಅತಿದೊಡ್ಡ ಉದ್ಯೋಗ ಮೇಳವಾಗಿದ್ದು, ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಉದ್ಯೋಗಾಕಾಂಕ್ಷಿಗಳಿಗೆ ಮನವಿ ಮಾಡಿದರು.
ಉದ್ಯೋಗ ಮೇಳದ ಸಂಪೂರ್ಣ ವಿವರಗಳನ್ನು ನೀಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವೇಕ್ ಆಳ್ವ, ಈ ವರ್ಷ 350 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, 24 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿವೆ ಎಂದರು. ಎಲ್ಲಾ ಪ್ರಕ್ರಿಯೆಗಳನ್ನು ಸುಗಮ, ಪಾರದರ್ಶಕ ಹಾಗೂ ಡಿಜಿಟಲ್ ರೂಪದಲ್ಲಿ ನಡೆಸುವ ಉದ್ದೇಶದಿಂದ ನೋಂದಣಿಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆನರಾ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿ.ಎ ಗಿರಿಧರ್ ಕಾಮತ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳ ಸುಮಾರು 500 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಂಡರು.