ಮಂಗಳೂರು : ಮಂಗಳೂರಿನ ಪೇಸ್ ನಾಲೆಡ್ಜ್ ಸಿಟಿ ಆವರಣದಲ್ಲಿ ಪಿ.ಎ. ಎಜುಕೇಶನ್ ಟ್ರಸ್ಟ್ನ ವಿವಿಧ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಅತ್ಯಂತ ದೇಶಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಿ.ಎ. ಎಜುಕೇಶನ್ ಟ್ರಸ್ಟ್ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಇಕ್ಬಾಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ನಿಷ್ಠೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಬೇಕು. ಪ್ರತಿಯೊಬ್ಬ ನಾಗರಿಕನ ಹೊಣೆಗಾರಿಕೆಯು ರಾಷ್ಟ್ರ ನಿರ್ಮಾಣ ಮತ್ತು ದೇಶದ ಪ್ರಗತಿಗೆ ಮಹತ್ವದ ಕೊಡುಗೆ ನೀಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್, ಪಿ.ಎ. ಫಸ್ಟ್ ಗ್ರೇಡ್ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫರಾಜ್ ಜೆ. ಹಾಶಿಂ ಹಾಗೂ ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ನ ಉಪಪ್ರಾಂಶುಪಾಲೆ ಡಾ. ಶರ್ಮಿಳಾ ಕುಮಾರಿ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ದೇಶದ ಅಭಿವೃದ್ಧಿಯಲ್ಲಿ ನಾಗರಿಕರ ಜವಾಬ್ದಾರಿಗಳ ಕುರಿತು ಅನಿಸಿಕೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ಪ್ರಾಂಶುಪಾಲೆ ಡಾ. ಅಫೀಫಾ ಸಲೀಂ, ವಿವಿಧ ಸಂಸ್ಥೆಗಳು ಹಾಗೂ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಇದೇ ವೇಳೆ ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಸಂದೇಶದೊಂದಿಗೆ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪ್ರೊ. ಸಿ. ವಿ. ಪುಜಾರ್ ಅವರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿ ಸಸಿಗಳನ್ನು ನೆಟ್ಟರು. ಸಂಸ್ಥೆಯ ಡೀನ್ – ವಿದ್ಯಾರ್ಥಿ ವ್ಯವಹಾರಗಳಾದ ಡಾ. ಸಯ್ಯಾದ್ ಅಮೀನ್ ಅಹಮ್ಮದ್ ಅವರು ಕಾರ್ಯಕ್ರಮದ ಸಮನ್ವಯ ನಿರ್ವಹಿಸಿದರು. ಸ್ವಾತಂತ್ರ್ಯದ ಮೌಲ್ಯಗಳನ್ನು ಗೌರವಿಸಿ, ದೇಶದ ಅಭಿವೃದ್ಧಿಗೆ ಜವಾಬ್ದಾರಿಯುತವಾಗಿ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಸಮಾರಂಭವು ಸಂಪನ್ನಗೊಂಡಿತು.